ಕರ್ನಾಟಕದ ಪ್ರತೀ ಹೋಬಳಿಗೂ ಸರ್ಕಾರಿ ವಸತಿ ಶಾಲೆ ಈ ವರ್ಷದಿಂದಲೇ ಜಾರಿ

varthajala
0

 ಬೆಂಗಳೂರು: ಕರ್ನಾಟಕದ ಎಲ್ಲಾ ಜಿಲ್ಲೆಗಳ ಪ್ರತೀ ಹೋಬಳಿಯಲ್ಲೂ ಒಂದಾದರೂ ವಸತಿ ಶಾಲೆ ಇರಲೇಬೇಕು ಎನ್ನುವುದು ನಮ್ಮ ಸರ್ಕಾರದ ಗುರಿ. ಈಗಾಗಲೇ ಈ ವರ್ಷದ ಬಜೆಟ್‌ನಲ್ಲಿ ಪ್ರಕಟಿಸಿದಂತೆ ಪ್ರತೀ ಹೋಬಳಿಯಲ್ಲೂ ಒಂದು ವಸತಿ ಶಾಲೆಯನ್ನು ಆರಂಭಿಸಲಾಗುವುದು. ಕರ್ನಾಟಕದ ಕೆಲವು ಹೋಬಳಿಯಲ್ಲಿ ಒಂದಕ್ಕಿಂತ ಹೆಚ್ಚು ವಸತಿ ಶಾಲೆಗಳಿವೆ. ಆದ್ದರಿಂದ ಕೆಲವು ಹೋಬಳಿಗಳಲ್ಲಿ ಇಲ್ಲವಾಗಿತ್ತು. ಹೀಗಾಗಿ ಈ ವರ್ಷ 20 ವಸತಿ ಶಾಲೆಗಳನ್ನು ಆರಂಭಿಸಲು ಅನುಮತಿ ನೀಡಿದ್ದೇನೆ. ಇದರಿಂದ ಖಂಡಿತವಾಗಿಯೂ ಗ್ರಾಮೀಣ ಭಾಗದ ಮಕ್ಕಳೂ ನಗರ ಪ್ರದೇಶದವರಂತೆಯೇ ಉತ್ತಮ ಶಿಕ್ಷಣ ಸೌಲಭ್ಯ ಪಡೆಯಲು ಸಾಧ್ಯವಾಗಲಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.ಸಮಾಜ ಕಲ್ಯಾಣ ಇಲಾಖೆ, ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಸಂಯುಕ್ತಾಶ್ರಯದಲ್ಲಿಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿಯಲ್ಲಿ ಉತ್ತಮ ಸಾಧನೆಗೈದ ವಿದ್ಯಾರ್ಥಿಗಳಿಗೆ ಬುಧವಾರಬ ಬ ಬೆಂಗಳೂರಿನಲ್ಲಿ ಹಮ್ಮಿಕೊಳ್ಳಲಾಗಿದ್ದ ಕಾರ್ಯಕ್ರಮದಲ್ಲಿ ಸನ್ಮಾನಿಸಿ ಮಾತನಾಡಿದರು.

ದಲಿತ ಸಂಘರ್ಷ ಸಮಿತಿ ರಾಜ್ಯದಲ್ಲಿ ನಡೆಸಿದ, "ನಮಗೆ ಸರಾಯಿ ಅಂಗಡಿ ಬೇಡ. ವಸತಿ ಶಾಲೆ ಬೇಕು" ಎನ್ನುವ ಹೋರಾಟದಿಂದ ಪ್ರೇರಿತನಾಗಿ ಮೊದಲ ಬಜೆಟ್ ಮಂಡಿಸುವ ವೇಳೆ ಗ್ರಾಮೀಣ ಭಾಗದಲ್ಲಿ ಮೊರಾರ್ಜಿ ಶಾಲೆಗಳನ್ನು ಆರಂಭಿಸಿದೆ. ಅವತ್ತಿನಿಂದ ನಿರಂತರವಾಗಿ ಮೊರಾರ್ಜಿ ವಸತಿ ಶಾಲೆಗಳನ್ನು ತೆರೆಯುತ್ತಲೇ ಇದ್ದೇನೆ. ಸದ್ಯ ಸಮಾಜ ಕಲ್ಯಾಣ ಇಲಾಖೆ ಅಡಿಯಲ್ಲಿ 833 ವಸತಿ ಶಾಲೆಗಳಿವೆ. ಅಲ್ಪ ಸಂಖ್ಯಾತ ಇಲಾಖೆಯಡಿಯಲ್ಲಿರುವುದೂ ಸೇರಿ ಒಟ್ಟು 946 ವಸತಿ ಶಾಲೆಗಳಿವೆ. ಈಗ ಎಲ್ಲಾ ಹೋಬಳಿಗಳಿಗೂ ವಸತಿ ಶಾಲೆ ಬರಲಿವೆ ಎಂದು ವಿವರಿಸಿದರು.

ಸರ್ಕಾರಿ ವಸತಿ ಶಾಲೆಗಳ ಮಕ್ಕಳು ಈ ಬಾರಿ ಶೇ96 ರಷ್ಟು ಫಲಿತಾಂಶ ಪಡೆದಿದ್ದಾರೆ. ಮುಂದಿನ ಬಾರಿ ಶೇ100 ರಷ್ಟು ಅಂಕ ಪಡೆಯಬೇಕು. ವಿದ್ಯಾವಂತರಲ್ಲೇ ಜಾತಿಪ್ರಜ್ಞೆ ಹೆಚ್ಚಾಗುತ್ತಿದೆ. ಡಾಕ್ಟರ್ ಓದಿದವರು ಇನ್ನೂ ಮೌಡ್ಯ ಬಿಟ್ಟಿಲ್ಲ. ಓದಿದವರೇ ಇನ್ನೂ ಹಣೆಬರಹದಲ್ಲಿ, ಕರ್ಮ ಸಿದ್ಧಾಂತದಲ್ಲಿ ನಂಬಿಕೆ ಇಟ್ಟುಕೊಂಡಿದ್ದಾರೆ. ಹೀಗಾಗಿ ವಿದ್ಯಾರ್ಥಿಗಳು ಇಂಥಾ ಮೌಢ್ಯದಲ್ಲಿ ನಂಬಿಕೆ ಇಡಬಾರದು ಎಂದು ಸಲಹೆ ನೀಡಿದರು.

ಹಿಂದೆ ಮುಂದುವರೆದ ಜಾತಿಯ ಹೆಣ್ಣು ಮಕ್ಕಳಿಗೂ ಶಿಕ್ಷಣ ಕಲಿಯುವ ಅವಕಾಶ ಇರಲಿಲ್ಲ. ಎಲ್ಲಾ ಜಾತಿಯ ಹೆಣ್ಣುಮಕ್ಕಳೂ ಶಿಕ್ಷಣದ ವಿಚಾರದಲ್ಲಿ ಶೋಷಿತರಾಗಿದ್ದವರೇ. ಈಗ ಹೆಣ್ಣು ಮಕ್ಕಳೇ ಶಿಕ್ಷಣದಲ್ಲಿ ಮುಂದಿರುವುದು ಖುಷಿ ಆಗತ್ತೆ.ಮಕ್ಕಳಿಗೆ ಜಾತಿ, ಧರ್ಮದ ತಾರತಮ್ಯ ಕಲಿಸುವವರೇ ನಾವು. ಆದ್ದರಿಂದ ಪೋಷಕರು, ಶಿಕ್ಷಕರು ಮೊದಲು ಕಂದಾಚಾರ,‌ಮೌಡ್ಯದಿಂದ ಹೊರಗೆ ಬರಬೇಕು. ಆಗ ಮಕ್ಕಳೂ ವೈಜ್ಞಾನಿಕವಾಗಿ ಬೆಳೆದು ಉತ್ತಮ ಭವಿಷ್ಯ ರೂಪಿಸಿಕೊಳ್ಳುತ್ತಾರೆ ಎಂದರು.

ಗ್ರಾಮೀಣ ಭಾಗದಲ್ಲಿ ಸರ್ವರಿಗೂ ಗುಣಮಟ್ಟದ ವೈಚಾರಿಕತೆ, ವೈಜ್ಞಾನಿಕತೆಯಿಂದ ಕೂಡಿದ ಶಿಕ್ಷಣ ದೊರೆಯಬೇಕು. ಜಾತಿ ವ್ಯವಸ್ಥೆ ಕಾರಣದಿಂದ ಸಮಾಜದಲ್ಲಿ ಅಸಮಾನತೆ ಸೃಷ್ಟಿಯಾಗಿದೆ ಎಲ್ಲಾ ಜಾತಿ, ಜನವರ್ಗದ ಮಕ್ಕಳಿಗೆ ಓದುವ ಅವಕಾಶ ಕಲ್ಪಿಸಿದ್ದು ನಮ್ಮ ಸಂವಿಧಾನ. ಜಾತಿ ವ್ಯವಸ್ಥೆ ಕಾರಣದಿಂದ ಸಮಾಜದಲ್ಲಿ ಅಸಮಾನತೆ ಸೃಷ್ಟಿಯಾಗಿದೆ.‌ ಇದನ್ನು ಹೋಗಲಾಡಿಸಬೇಕಾಗಿದೆ. ನನಗೆ ಶಿಕ್ಷಣ ಸಿಕ್ಕಿದ್ದರಿಂದಲೇ ಮುಖ್ಯಮಂತ್ರಿ ಆಗುವ ಅವಕಾಶ ದೊರೆಯಿತು. ಇಲ್ಲದಿದ್ದರೆ ನಾನೂ ಎಮ್ಮೆ, ಹಸು ಮೇಯಿಸುತ್ತಾ ಅಷ್ಟಕ್ಕೇ ಸೀಮಿತ ಆಗಬೇಕಾಗಿತ್ತು. ಬುದ್ದ, ಬಸವಣ್ಣ ಎಷ್ಟು ಶತಮಾನಗಳ ಹಿಂದೆ ಜಾತಿ ವ್ಯವಸ್ಥೆ ಅಳಿಸಲು ಶ್ರಮಿಸಿದರು. ಆದರೆ ವಿದ್ಯಾವಂತರಲ್ಲೇ ಜಾತಿಪ್ರಜ್ಞೆ ಹೆಚ್ಚಾಗುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದರು. 

ಹುಟ್ಟುವಾಗ ಎಲ್ಲಾ ಮಕ್ಕಳೂ ವಿಶ್ವ ಮಾನವರಾಗಿ ಹುಟ್ಟಿ ಬೆಳೆಯುತ್ತಾ ಅಲ್ಪ ಮಾನವರಾಗುತ್ತಾರೆ ಎನ್ನುವ ಕುವೆಂಪು ಅವರ ಮಾತು ಪ್ರಸ್ತಾಪಿಸಿದ ಮುಖ್ಯಮಂತ್ರಿಗಳು ಮಕ್ಕಳು ಅಲ್ಪ ಮಾನವರಾಗದಂತೆ ಕಾಪಾಡುವ ಜವಾಬ್ದಾರಿ ಶಿಕ್ಷಕರು, ಪೋಷಕರ ಮೇಲಿದೆ. ಬಸವಣ್ಣನವರು 12ನೇ ಶತಮಾನದಲ್ಲೇ ದಲಿತರು ಮತ್ತು ಬ್ರಾಹ್ಮಣರ ನಡುವೆ ಅಂತರ್ಜಾತಿ ವಿವಾಹ ಮಾಡಿಸಿ ಗೆದ್ದರು. ಜಾತಿ ವ್ಯವಸ್ಥೆ ಶಿಥಿಲವಾಗಬೇಕಾದರೆ ದಲಿತರು, ಹಿಂದುಳಿದವರಿಗೆ ಆರ್ಥಿಕ‌ ಶಕ್ತಿ ಬರಬೇಕು, ಸಾಮಾಜಿಕವಾಗಿಯೂ ಶಕ್ತಿ ಬರಬೇಕು . ಈ ಬಗ್ಗೆ ಅಂಬೇಡ್ಕರ್ ಅವರು ಸಂವಿಧಾನ ಸಭೆಯಲ್ಲಿ ಆಡಿದ ಮಾತುಗಳು ಇವತ್ತಿಗೂ ಬಹಳ ಪ್ರಸ್ತುತವಾಗಿದೆ ಎಂದರು. ಎಸ್‌ಎಸ್‌ ಎಲ್‌ ಸಿ ಮತ್ತು ಪಿಯುಸಿ ಯಲ್ಲಿ ಹೆಚ್ಚು ಅಂಕ ಗಳಿಸಿದ, ಸಾಧನೆ ಮಾಡಿದ ಎಲ್ಲಾ ವಿದ್ಯಾರ್ಥಿಗಳಿಗೆ ಮತ್ತು ಈ ವಿದ್ಯಾರ್ಥಿಗಳ ಸಾಧನೆಗೆ ನೆರವಾದ ಎಲ್ಲಾ ಶಿಕ್ಷಕರಿಗೆ ಮುಖ್ಯಮಂತ್ರಿಗಳು ಇದೇ ಸಂದರ್ಭದಲ್ಲಿ ಅಭಿನಂದಿಸಿದರು.

ಕ್ರೈಸ್ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಸಕರಾದ ರಿಜ್ವಾನ್ ಅರ್ಷದ್ ಅವರು ವಹಿಸಿದ್ದರು. ಕಾರ್ಯಕ್ರಮದ ಮಹತ್ವವನ್ನು ಸಮಾಜ ಕಲ್ಯಾಣ ಸಚಿವರಾದ ಹೆಚ್.ಸಿ.ಮಹದೇವಪ್ಪ ಅವರು ವಿವರಿಸಿದರು. ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಪರಿಷತ್ ಸದಸ್ಯರಾದ ಸುದಾಮ್ ದಾಸ್ ಮತ್ತು ಇಲಾಖಾ ಅಧಿಕಾರಿಗಳು ಉಪಸ್ಥಿತರಿದ್ದರು.

Post a Comment

0Comments

Post a Comment (0)